ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸ್ ಗನ್ ಸದ್ದು ಮಾಡಿದ್ದು, ದರೋಡೆಕೋರನೋರ್ವನ ಮೇಲೆ ಬೆಂಡಿಗೇರಿ ಠಾಣೆಯ ಪೊಲೀಸರು ಹುಬ್ಬಳ್ಳಿ ಹೊರವಲಯದಲ್ಲಿ ಗುಂಡಿನ ದಾಳಿ ಮಾಡಿದ್ದು, ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಲಾಗಿದೆ.
ದರೋಡೆ ಪ್ರಕರಣದ ಆರೋಪಿ ವಿನೋದ್ ಗುಡಿಯಾಲ್ ಕಾಲಿಗೆ ಬೆಂಡಿಗೇರಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಯಶ್ರೀ ಛಲವಾದಿ ಅವರು ಗುಂಡು ಹಾರಿಸಿದ್ದಾರೆ. ಆರೋಪಿಯ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿದ್ದು ಎನ್ನಲಾಗಿದೆ.
ಹುಬ್ಬಳ್ಳಿ ಹೊರವಲಯದ ತಾರಿಹಾಳದ ಬಳಿಯಲ್ಲಿ ಸ್ಥಳ ಮಹಜರ್ ಮಾಡುವ ಸಂದರ್ಭದಲ್ಲಿ ಪೊಲೀಸರ ಮೇಲೆ ಆರೋಪಿಯು ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಸಬ್ ಇನ್ಸ್ಪೆಕ್ಟರ್ ಜಯಶ್ರೀ ಚಲುವಾದಿ ರಕ್ಷಣೆಗಾಗಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಬಳಿಕ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ದಾಳಿ ಸಂದರ್ಭದಲ್ಲಿ ಪಿಎಸ್ಐ ಜಯಶ್ರೀ ಸೇರಿದಂತೆ ಮೂವರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ಗಾಯಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.